ಯಲಬುರ್ಗಾ: ಯೋಗಾಭ್ಯಾಸದಿಂದ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಬದುಕಿನಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಬಿಇಒ ಅಶೋಕ ಗೌಡ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಯಲು ರಂಗಮಂದಿರ ಆವರಣದಲ್ಲಿ ರವಿವಾರ ತಾಲೂಕು ಆಡಳಿತ ಹಾಗೂ ಶ್ರೀ ಬಸವಲಿಂಗೇಶ್ವರ ಯೋಗ ತರಬೇತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯೋಗವು ದೇಹ ಮತ್ತು ಮನಸ್ಸಿನ ಆರೋಗ್ಯ ಕಾಪಾಡುವ ಅತ್ಯುತ್ತಮ ಸಾಧನವಾಗಿದೆ. ಇಂದಿನ ಒತ್ತಡದ ಬದುಕಿನಲ್ಲಿ ಯೋಗಾಭ್ಯಾಸದಿಂದ ಮಾನಸಿಕ ನೆಮ್ಮದಿ ಹಾಗೂ ದೈಹಿಕ ಸದೃಢತೆ ಪಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ನಿತ್ಯ ಯೋಗ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಕ್ತಾರ ವೀರಣ್ಣ ಹುಬ್ಬಳ್ಳಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನದಿಂದ ಯೋಗವು ವಿಶ್ವದಾದ್ಯಂತ ಹೆಚ್ಚಿನ ಪ್ರಚಾರ ಪಡೆದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ ಎಂದು ಹೇಳಿದರು.
ಸಾನ್ನಿಧ್ಯ ವಹಿಸಿ ಮಾತನಾಡಿದ ಯಲಬುರ್ಗಾದ ಶ್ರೀಧರ ಮುರುಡಿಮಠದ ಬಸವಲಿಂಗೇಶ್ವರ ಸ್ವಾಮೀಜಿ, ಉತ್ತಮ ಆರೋಗ್ಯ ಮತ್ತು ಶಾಂತ ಜೀವನಕ್ಕಾಗಿ ಪ್ರತಿಯೊಬ್ಬರೂ ನಿತ್ಯ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮಕ್ಕೆ ಬೇನಾಳದ ಸದಾಶಿವ ಸ್ವಾಮೀಜಿ ಹಾಗೂ ಜಿಗೇರಿಯ ಕರಿಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಪಪಂ ಮುಖ್ಯಾಧಿಕಾರಿ ನಾಗೇಶ, ಆಯುಷ್ ವೈದ್ಯ ಡಾ. ವಿವೇಕ ವಾಗುಲೆ, ಸುರೇಶಗೌಡ ಶಿವನಗೌಡ್ರ, ಅಮರೇಶ ಹುಬ್ಬಳ್ಳಿ, ಬಸವರಾಜ ಗುಳಗುಳಿ, ಸಂತೋಷಿಮಾ ಜೋಶಿ, ದೊಡ್ಡಯ್ಯ ಗುರುವಿನ, ಉಮೇಶ ಕುಂಬಾರ, ಖಾದರಸಾಬ, ಸಂಗಮೇಶ ಶ್ಯಾಗೋಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
