ಯಲಬುರ್ಗಾ ಬಕ್ರೀದ್ ಹಬ್ಬವನ್ನು ತಾಲೂಕಿನಾದ್ಯಂತ ಶಾಂತಿಯುತ, ಸೌಹಾರ್ದಯುತ ಹಾಗೂ ಕಾನೂನುಬದ್ಧವಾಗಿ ಆಚರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ಶಾಂತಿ ಸಭೆಯನ್ನು ಆಯೋಜಿಸಲಾಯಿತು.
ಸಭೆ ಉದ್ದೇಶಿಸಿ ಸಿಪಿಐ ಮೌನೇಶ್ವರ ಮಾಲಿ ಪಾಟೀಲ್ ಮಾತನಾಡಿ,ಬಕ್ರೀದ್ ಹಬ್ಬವು ತ್ಯಾಗ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ಸಂಕೇತವಾಗಿದ್ದು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸುವ ರೀತಿಯಲ್ಲಿ ಆಚರಣೆ ನಡೆಯಬೇಕು ಎಂದು ಹೇಳಿದರು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳು, ಪ್ರಚೋದನಕಾರಿ ಸಂದೇಶಗಳು ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಪಿಎಸ್ಐ ವಿಜಯ ಪ್ರತಾಪ್ ಮಾತನಾಡಿ,ಹಬ್ಬದ ಸಂದರ್ಭದಲ್ಲಿ ಮೆರವಣಿಗೆ, ಸಾರ್ವಜನಿಕ ಪ್ರಾರ್ಥನೆ ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನಡೆಯಬೇಕೆಂದು ಸೂಚನೆ ನೀಡಿದರು. ಯಾವುದೇ ಸಮಸ್ಯೆ ಅಥವಾ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಹಾಗೂ ಹಿಂದೂ ಮುಖಂಡರು ಕೂಡ ಪೊಲೀಸ್ ಇಲಾಖೆಯೊಂದಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ಸಮುದಾಯದ ಎಲ್ಲರೂ ಕೈಜೋಡಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ವೀರಣ್ಣ ಹುಬ್ಬಳ್ಳಿ,ಬಾಬುಸಾಬ ಕುಂದಗೋಳ,ಮಂಜುನಾಥ ಅಧಿಕಾರಿ,ಮೆಹಬೂಬಸಾಬ ಮಕಾಂದರ,ಶಿವಾನಂದ ಬಣಕಾರ್,ಸುರೇಶ ನಡಲುಮನಿ,ಬಾಬುಸಾಬ ಮಂಡಲಗೇರಿ,ಚಂದ್ರಪ್ಪ ನಡಲುಮನಿ,ಸಿಬ್ಬಂದಿಗಳಾದ ವಿಠ್ಠಲ್,ಬಸಯ್ಯ,ಶರಣು ಸೇರಿದಂತೆ ಇತರರು ಇದ್ದರು.
