ಡಿ.ಡಿ. ನ್ಯೂಸ್ಯ. ಯಲಬುರ್ಗಾ: ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ತಾಲೂಕು ಘಟಕದ ಕಚೇರಿಯಲ್ಲಿ ಇದೇ ದಿ. 25ರಂದು ನಡೆಯಲಿರುವ ಪತ್ರಿಕಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಪತ್ರಕರ್ತರ ಸಮಾವೇಶದ ಭಿತ್ತಿಪತ್ರವನ್ನು KUWJ ಜಿಲ್ಲಾಧ್ಯಕ್ಷ ಹನುಮಂತ ಹಳ್ಳಿಕೇರಿ ಶುಕ್ರವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪತ್ರಿಕಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಪತ್ರಕರ್ತರ ಸಮಾವೇಶವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲಾ ಪತ್ರಕರ್ತರು ಹಾಗೂ ಸಂಘದ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಪತ್ರಕರ್ತರ ವೃತ್ತಿಪರ ಕೌಶಲ್ಯ, ಸಮಸ್ಯೆಗಳು ಹಾಗೂ ಸಂಘಟನಾತ್ಮಕ ವಿಚಾರಗಳ ಕುರಿತು ಚರ್ಚಿಸಲು ಇಂತಹ ಸಮಾವೇಶಗಳು ಉತ್ತಮ ವೇದಿಕೆಯಾಗಲಿವೆ ಎಂದರು.
ಯಲಬುರ್ಗಾ ತಾಲೂಕು ಘಟಕದ ವತಿಯಿಂದ ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ನಡೆಸಲು ತಾಲೂಕು ಘಟಕದ ಪದಾಧಿಕಾರಿಗಳು ಕೈಗೊಂಡಿರುವ ಸಿದ್ಧತಾ ಕಾರ್ಯಗಳು ಮೆಚ್ಚುವಂತಿವೆ. ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸುವ ಪತ್ರಕರ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ, ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.
KUWJ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ. ನಾಗರಾಜ ಮಾತನಾಡಿ, ಪತ್ರಕರ್ತರ ಸಂಘವು ಪತ್ರಕರ್ತರ ಹಿತಾಸಕ್ತಿ ಕಾಪಾಡುವುದರ ಜೊತೆಗೆ ವೃತ್ತಿಪರ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ KUWJ ಗೌರವ ಅಧ್ಯಕ್ಷ ಇಮಾಮ ಸಂಕನೂರು, ತಾಲೂಕು ಅಧ್ಯಕ್ಷ ಮಲ್ಲು ಮಾಟರಂಗಿ, ಪ್ರಧಾನ ಕಾರ್ಯದರ್ಶಿ ಸಂತೋಷ ಬಂಡ್ರಿ, ರಾಜ್ಯ ಕಾರ್ಯಕಾರಣಿ ಸದಸ್ಯ ಸಿದ್ದು ಹಿರೇಮಠ, ಮಹಾಂತೇಶ ಛಲವಾದಿ, ಶರಣು ಗುಮಗೇರಿ, ಉಪಾಧ್ಯಕ್ಷ ಚಂದ್ರು ಮರದಡ್ಡಿ, ದೊಡ್ಡಬಸಪ್ಪ ಹಕಾರಿ, ಬಾಳನಗೌಡ ಚಂಪಗೌಡ್ರ, ಶ್ರೀಧರ ಪೂಜಾರ, ದೇವೇಂದ್ರ ಜಮಾದರ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
