ಯಲಬುರ್ಗಾ ಕ್ಷೇತ್ರದ ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಹಾಗೂ ಸಾರ್ವಜನಿಕರ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಕುಕನೂರು ಪಟ್ಟಣದ ಕಲ್ಲೇಶ್ವರ ನಗರದಲ್ಲಿ ನೂತನ “ಶ್ರೀ ಶರಣು ಕಾರ್ಯಾಲಯ”ವನ್ನು ಆರಂಭಿಸಲಾಗುತ್ತಿದೆ ಎಂದು ತಾಪಂ ಮಾಜಿ ಉಪಾಧ್ಯಕ್ಷ ಹಾಗೂ ಸಮಾಜಸೇವಕ ಕಳಕಪ್ಪ ಕಂಬಳಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಜೂನ್ 3ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ನೂತನ ಕಾರ್ಯಾಲಯದ ಪ್ರಾರಂಭೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಂದು ಸತ್ಯನಾರಾಯಣ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಸ್ವಾಮೀಜಿಗಳು, ಗಣ್ಯರು, ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಜನತೆಗೆ ಆಹ್ವಾನ ನೀಡಲಾಗಿದೆ ಎಂದು ಹೇಳಿದರು.
ಕಳೆದ 25 ವರ್ಷಗಳಿಂದ ನಿರಂತರವಾಗಿ ಕ್ಷೇತ್ರದ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಗ್ರಾಮೀಣ ಭಾಗದ ಜನರ ಸಮಸ್ಯೆಗಳು, ರೈತರ ಸಂಕಷ್ಟಗಳು, ಕುಡಿಯುವ ನೀರಿನ ತೊಂದರೆ, ರಸ್ತೆ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ಹಲವು ವಿಷಯಗಳಲ್ಲಿ ಜನರೊಂದಿಗೆ ನಿಂತು ಕೆಲಸ ಮಾಡಿದ್ದೇನೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯ ಎಂದು ಭಾವಿಸಿ ರಾಜಕೀಯ ಹಾಗೂ ಸಾಮಾಜಿಕ ಬದುಕಿನಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು.
ಈ ಹಿಂದೆ ತಾಲೂಕು ಪಂಚಾಯತ್ ಉಪಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ ವೇಳೆ ಅನೇಕ ಜನಪರ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಕೆಲಸ ಮಾಡಿದ್ದೇನೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಶ್ರಮಿಸಿದ್ದು, ಸಾಮಾನ್ಯ ಜನರ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸಲು ಪ್ರಯತ್ನಿಸಿದ್ದೇನೆ. ಜನರೊಂದಿಗೆ ನೇರ ಸಂಪರ್ಕದಲ್ಲಿದ್ದು ಅವರ ವಿಶ್ವಾಸ ಗಳಿಸಿರುವುದು ನನ್ನ ಬದುಕಿನ ದೊಡ್ಡ ಶಕ್ತಿಯಾಗಿದೆ ಎಂದು ಹೇಳಿದರು.
ಜನಸೇವೆಯನ್ನು ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದಲೇ ಈ ನೂತನ ಕಾರ್ಯಾಲಯವನ್ನು ಆರಂಭಿಸಲಾಗುತ್ತಿದೆ. ಕಾರ್ಯಾಲಯದಲ್ಲಿ ನಮ್ಮ ಸಿಬ್ಬಂದಿಗಳು ನಿರಂತರವಾಗಿ ಲಭ್ಯವಿರಲಿದ್ದು, ಸಾರ್ವಜನಿಕರು ಯಾವುದೇ ಸಮಯದಲ್ಲಿ ತಮ್ಮ ಸಮಸ್ಯೆಗಳು, ಅಹವಾಲುಗಳು ಹಾಗೂ ತೊಂದರೆಗಳನ್ನು ತಿಳಿಸಬಹುದಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಇಂದು ರಾಜಕೀಯ ಕ್ಷೇತ್ರದಲ್ಲಿ ಸೇವಾ ಮನೋಭಾವ ಅತಿ ಮುಖ್ಯವಾಗಿದೆ. ಜನರ ವಿಶ್ವಾಸ ಗಳಿಸಿದಾಗ ಮಾತ್ರ ಜನಪ್ರತಿನಿಧಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ. ಕ್ಷೇತ್ರದ ಜನತೆ ನನ್ನ ಮೇಲೆ ಅಪಾರ ಪ್ರೀತಿ ಮತ್ತು ವಿಶ್ವಾಸ ಇಟ್ಟಿದ್ದು, ಮುಂದಿನ ದಿನಗಳಲ್ಲಿ ನನ್ನನ್ನು ಶಾಸಕನಾಗಿ ಮಾಡಲು ಜನತೆ ಮುಂದಾಗಿದ್ದಾರೆ. ಗ್ರಾಮೀಣ ಭಾಗದ ಜನರು, ಯುವಕರು, ಮಹಿಳೆಯರು ಹಾಗೂ ಮುಖಂಡರು ಚುನಾವಣೆಗೆ ಸ್ಪರ್ಧಿಸುವಂತೆ ನಿರಂತರವಾಗಿ ಮನವಿ ಮಾಡುತ್ತಿದ್ದಾರೆ ಎಂದು ಹೇಳಿದರು.
ಜನರ ಆಶೀರ್ವಾದ, ಪ್ರೀತಿ ಮತ್ತು ಬೆಂಬಲವೇ ನನ್ನ ರಾಜಕೀಯ ಬದುಕಿನ ದೊಡ್ಡ ಆಸ್ತಿ. ನಾನು ಯಾವುದೇ ಹುದ್ದೆಗಾಗಿ ಕೆಲಸ ಮಾಡಿಲ್ಲ, ಜನರ ಸೇವೆಗಾಗಿ ಸದಾ ಶ್ರಮಿಸಿದ್ದೇನೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಸು ಇದ್ದರೆ ಮಾತ್ರ ಸಮಾಜದಲ್ಲಿ ಒಳ್ಳೆಯ ಹೆಸರು ಗಳಿಸಲು ಸಾಧ್ಯ. ಇದೇ ಕಾರಣಕ್ಕಾಗಿ ಸಾರ್ವಜನಿಕರ ನಡುವೆ ಸದಾ ಇದ್ದು ಅವರ ಕಷ್ಟ-ಸುಖಗಳಲ್ಲಿ ಭಾಗಿಯಾಗುತ್ತಿದ್ದೇನೆ ಎಂದು ತಿಳಿಸಿದರು.
ಮಾಧ್ಯಮ ಮಿತ್ರರ ಸಹಕಾರ ಮತ್ತು ಪ್ರೋತ್ಸಾಹದಿಂದಲೇ ನಾನು ಜನರ ಮಧ್ಯೆ ಇನ್ನಷ್ಟು ಗುರುತಿಸಿಕೊಂಡಿದ್ದೇನೆ. ಸಮಾಜದ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಹಾಗೂ ಜನರ ಧ್ವನಿಯನ್ನು ಆಡಳಿತದ ಗಮನಕ್ಕೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ನನ್ನ ರಾಜಕೀಯ ಮತ್ತು ಸಾಮಾಜಿಕ ಏಳಿಗೆಯಲ್ಲಿ ಮಾಧ್ಯಮದವರ ಪ್ರೀತಿ, ಬೆಂಬಲ ಹಾಗೂ ಸಹಕಾರ ಮರೆಯಲಾಗದು ಎಂದು ಹೇಳಿದರು.
ಸಾಮಾಜಿಕ ಸೇವೆ, ಜನಪರ ಕಾರ್ಯಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಆರಂಭಗೊಳ್ಳುತ್ತಿರುವ “ಶ್ರೀ ಶರಣು ಕಾರ್ಯಾಲಯ”ವು ಜನಸೇವೆಯ ಹೊಸ ಅಧ್ಯಾಯವಾಗಲಿದೆ. ಸಾಮಾನ್ಯ ಜನರಿಗೆ ಸಹಾಯ ಮಾಡುವ ಕೇಂದ್ರವಾಗಿಯೂ, ಕ್ಷೇತ್ರದ ಅಭಿವೃದ್ಧಿ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡುವ ವೇದಿಕೆಯಾಗಿಯೂ ಇದು ಕಾರ್ಯನಿರ್ವಹಿಸಲಿದೆ. ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಸಲಹೆಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಕ್ಷೇತ್ರದ ರೈತರು, ಯುವಕರು, ಮಹಿಳೆಯರು, ಕಾರ್ಮಿಕರು ಹಾಗೂ ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸದಾ ಕಾರ್ಯನಿರ್ವಹಿಸಲಾಗುವುದು. ಜನರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡುವುದೇ ನನ್ನ ಉದ್ದೇಶವಾಗಿದೆ. ಜನರ ಸೇವೆ ಮಾಡುವ ಅವಕಾಶ ದೊರೆತರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಹೇಳಿದರು.
ಜೂನ್ 3ರಂದು ನಡೆಯುವ ನೂತನ “ಶ್ರೀ ಶರಣು ಕಾರ್ಯಾಲಯ”ದ ಉದ್ಘಾಟನಾ ಸಮಾರಂಭಕ್ಕೆ ಸಾರ್ವಜನಿಕರು, ಅಭಿಮಾನಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಮಾಧ್ಯಮ ಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಶುಭ ಹಾರೈಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಈರಪ್ಪ ಕುಡಗುಂಟಿ, ಷಣ್ಮುಖಪ್ಪ ರಾಂಪೂರ, ಫಕೀರಪ್ಪ ತಳವಾರ, ಸುರೇಶ ಬೆಣಕಲ್, ಇಮಾಮ್ ಹುಸೇನ ಮಂಡಲಗಿರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
