ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಕೊನೆಗೂ ಮುಕ್ತಾಯದ ಹಂತ ತಲುಪಿದ್ದು, ನಾಳೆ (ಬುಧವಾರ, ಜೂನ್ 3) ನಡೆಯಲಿರುವ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಜೊತೆಯಲ್ಲೇ ಒಟ್ಟು 12 ಶಾಸಕರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ಖಚಿತಪಡಿಸಿವೆ.
ಕಾಂಗ್ರೆಸ್ ಪಾಳಯದಲ್ಲಿ ಸಚಿವ ಸ್ಥಾನಕ್ಕಾಗಿ ಭಾರಿ ಪೈಪೋಟಿ ಮತ್ತು ತೀವ್ರ ಲಾಬಿ ಏರ್ಪಟ್ಟಿದ್ದರಿಂದ, ದೆಹಲಿಯಲ್ಲಿ ಹಲವು ಸುತ್ತಿನ ಸಭೆಗಳು ನಡೆದಿವೆ. ಹೈಕಮಾಂಡ್ ನಾಯಕರೊಂದಿಗೆ ನಡೆದ ಸುಧೀರ್ಘ ಚರ್ಚೆಯ ಬಳಿಕ, ಮೊದಲ ಹಂತದಲ್ಲಿ ಪ್ರಮಾಣವಚನ ಸ್ವೀಕರಿಸಲಿರುವ 12 ನಾಯಕರ ಹೆಸರನ್ನು ಶಾರ್ಟ್ಲಿಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಹೈಕಮಾಂಡ್ ನಾಯಕರ ಮತ್ತೊಂದು ಸಭೆ
ರಾಜ್ಯ ಕಾಂಗ್ರೆಸ್ ನಾಯಕರೊಂದಿಗಿನ ಸರಣಿ ಮಾತುಕತೆಯ ಬೆನ್ನಲ್ಲೇ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಹೈಕಮಾಂಡ್ ನಾಯಕರ ಮತ್ತೊಂದು ಪ್ರಮುಖ ಸಭೆ ಆಯೋಜನೆಗೊಂಡಿದೆ. ಈ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭಾಗವಹಿಸಲಿದ್ದಾರೆ. ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಈಗಾಗಲೇ ನಡೆಸಿರುವ ಸುದೀರ್ಘ ಚರ್ಚೆಯ ಅಭಿಪ್ರಾಯಗಳನ್ನು ಆಧರಿಸಿ, ಮೊದಲ ಹಂತದ ಸಚಿವರ ಅಂತಿಮ ಪಟ್ಟಿಗೆ ಈ ಸಭೆಯಲ್ಲಿ ಹೈಕಮಾಂಡ್ ನಾಯಕರು ಅಧಿಕೃತ ಮುದ್ರೆ ಒತ್ತಲಿದ್ದಾರೆ.
ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಯಾರಿಗೆಲ್ಲ ಚಾನ್ಸ್..?
ಸದ್ಯ ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಹಿರಿಯ ಹಾಗೂ ಯುವ ನಾಯಕರ ಮಿಶ್ರಣ ಕಂಡುಬಂದಿದ್ದು, ಕೆ ಎಚ್ ಮುನಿಯಪ್ಪ, ಡಾ.ಜಿ ಪರಮೇಶ್ವರ್, ಯು.ಟಿ. ಖಾದರ್, ಎನ್.ಎ. ಹ್ಯಾರಿಸ್, ಬೋಸರಾಜು, ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಎಂ. ಕೃಷ್ಣಪ್ಪ ಮತ್ತು ಶಿವರಾಜ್ ತಂಗಡಗಿ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಕೊನೆಯ ಒಂದು ಸ್ಥಾನಕ್ಕಾಗಿ ಕಾಂಗ್ರೆಸ್ನ ಇಬ್ಬರು ಪ್ರಭಾವಿ ನಾಯಕರಾದ ಎಂ.ಬಿ. ಪಾಟೀಲ್ ಹಾಗೂ ಈಶ್ವರ್ ಖಂಡ್ರೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ ಎನ್ನಲಾಗಿದ್ದು, ಇಬ್ಬರಲ್ಲಿ ಯಾರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ನೂತನ ಸಚಿವ ಸಂಪುಟದ ಈ 12 ಸಚಿವರ ಆಯ್ಕೆ ಪ್ರಕ್ರಿಯೆಯು ಏಕಪಕ್ಷೀಯ ನಿರ್ಧಾರವಾಗಿರದೆ, ಅನೇಕ ರಾಜಕೀಯ ಲೆಕ್ಕಾಚಾರಗಳೊಂದಿಗೆ ನಡೆದಿದೆ ಎನ್ನಲಾಗಿದ್ದು, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ, ಕಾಂಗ್ರೆಸ್ ವರಿಷ್ಟರ ಸ್ಪಷ್ಟ ಮಾರ್ಗದರ್ಶನ ಹಾಗೂ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಈ ಪಟ್ಟಿಗೆ ಅಂತಿಮ ರೂಪ ನೀಡಲಾಗಿದೆ ಎಂದು ತಿಳಿದುಬಂದಿದೆ.
