ಕಾಲುಬಾಯಿ ರೋಗ ತಡೆಗೆ ಪಶು ಇಲಾಖೆಯ ಸಮರೋಪಾದಿ ಕಾರ್ಯಾಚರಣೆ | 13 ಸಾವಿರಕ್ಕೂ ಅಧಿಕ ಜಾನುವಾರುಗಳಿಗೆ ಲಸಿಕೆ
ಯಲಬುರ್ಗಾ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ನಡೆಯುತ್ತಿರುವ 9ನೇ ಸುತ್ತಿನ ಕಾಲುಬಾಯಿ ರೋಗ (FMD) ಲಸಿಕಾ ಅಭಿಯಾನ ತಾಲೂಕಿನಲ್ಲಿ ಭರದಿಂದ ಸಾಗಿದ್ದು, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ತೆರಳಿ ಜಾನುವಾರುಗಳಿಗೆ ಲಸಿಕೆ ನೀಡುವ ಮೂಲಕ ರೋಗ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ.
ಏಪ್ರಿಲ್ 23ರಿಂದ ಆರಂಭವಾದ ಲಸಿಕಾ ಅಭಿಯಾನ ಮೇ 22ರವರೆಗೆ ನಡೆಯಲಿದ್ದು, ತಾಲೂಕಿನಾದ್ಯಂತ 29 ಸಾವಿರಕ್ಕೂ ಅಧಿಕ ಜಾನುವಾರುಗಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ 13 ಸಾವಿರಕ್ಕೂ ಅಧಿಕ ಜಾನುವಾರುಗಳಿಗೆ ಲಸಿಕೆ ನೀಡಲಾಗಿದ್ದು, ಉಳಿದ ಜಾನುವಾರುಗಳಿಗೆ ಮೇ ತಿಂಗಳೊಳಗೆ ಲಸಿಕೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಿಬ್ಬಂದಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದಲೇ ಸಿಬ್ಬಂದಿ ಹಾಗೂ ಲಸಿಕೆದಾರರು ಕಾರ್ಯಾರಂಭ ಮಾಡುತ್ತಿದ್ದಾರೆ. ಬಿಸಿಲಿನ ತಾಪ ಹೆಚ್ಚಾಗುತ್ತಿರುವ ಹಿನ್ನೆಲೆ ಬೆಳಿಗ್ಗೆ ಮತ್ತು ಸಂಜೆ ವೇಳೆಯಲ್ಲಿ ಲಸಿಕೆ ಹಾಕುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ. ರೈತರ ಮನೆಗಳಿಗೆ ತೆರಳಿ ಜಾನುವಾರುಗಳಿಗೆ ಲಸಿಕೆ ನೀಡುತ್ತಿರುವುದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ.
ತಾಲೂಕಿನಲ್ಲಿ ಒಟ್ಟು 25 ಮಂದಿ ಸಿಬ್ಬಂದಿ ಮತ್ತು ಲಸಿಕೆದಾರರು ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದು, ಸಿಬ್ಬಂದಿ ಕೊರತೆ ನಡುವೆಯೂ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪ್ರತಿಯೊಂದು ಜಾನುವಾರುಗಳಿಗೆ 12 ಅಂಕಿಯ ಕಿವಿಯೋಲೆ ಅಳವಡಿಸಿ “ಭಾರತ್ ಪಶುಧನ್” ತಂತ್ರಾಂಶದಲ್ಲಿ ನೋಂದಣಿ ಮಾಡಲಾಗುತ್ತಿದ್ದು, OTP ಆಧಾರಿತ ಲಸಿಕಾ ದೃಢೀಕರಣ ವ್ಯವಸ್ಥೆಯನ್ನು ಈ ಬಾರಿ ಮೊದಲ ಬಾರಿಗೆ ಜಾರಿಗೆ ತರಲಾಗಿದೆ. ಸಿಬ್ಬಂದಿ ಮನೆಗೆ ತೆರಳಿದ ವೇಳೆ ಜಾನುವಾರು ಮಾಲೀಕರ ಮೊಬೈಲ್ಗೆ OTP ಕಳುಹಿಸಲಾಗುತ್ತಿದ್ದು, ದೃಢೀಕರಣದ ಬಳಿಕವೇ ಲಸಿಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದೆ.
ಕಾಲುಬಾಯಿ ರೋಗವು ವೈರಾಣುವಿನಿಂದ ಹರಡುವ ಅಪಾಯಕಾರಿ ಅಂಟುರೋಗವಾಗಿದ್ದು, ದನ, ಎಮ್ಮೆ, ಆಡು, ಕುರಿ ಹಾಗೂ ಹಂದಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ರೋಗ ಬಾಧಿಸಿದ ಜಾನುವಾರುಗಳಲ್ಲಿ ಹಾಲಿನ ಉತ್ಪಾದನೆ ಇಳಿಮುಖವಾಗುವುದರ ಜೊತೆಗೆ ಗರ್ಭಪಾತ, ಗರ್ಭಕಟ್ಟುವಿಕೆಯಲ್ಲಿ ವಿಳಂಬ ಹಾಗೂ ಕೆಲಸ ಸಾಮರ್ಥ್ಯ ಕುಸಿಯುವ ಸಮಸ್ಯೆಗಳು ಎದುರಾಗುತ್ತವೆ. ಇದರಿಂದ ರೈತರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರತಿ ಆರು ತಿಂಗಳಿಗೊಮ್ಮೆ ಲಸಿಕೆ ಹಾಕಿಸುವುದು ಅತ್ಯಗತ್ಯವಾಗಿದೆ ಎಂದು ಇಲಾಖೆ ತಿಳಿಸಿದೆ.
ಬಿಸಿಲಿನ ತಾಪ ಹೆಚ್ಚಾಗಿರುವ ಕಾರಣ ಸಿಬ್ಬಂದಿ ಬೆಳಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಲಸಿಕೆ ಕಾರ್ಯವನ್ನು ವೇಗವಾಗಿ ನಡೆಸುತ್ತಿದ್ದಾರೆ. ಗ್ರಾಮೀಣ ಭಾಗದ ರೈತರು ಕೂಡ ಇಲಾಖೆಯ ಕಾರ್ಯಕ್ಕೆ ಉತ್ತಮ ಸ್ಪಂದನೆ ನೀಡುತ್ತಿದ್ದು, ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ.
“ತಾಲೂಕಿನಲ್ಲಿ ಸಿಬ್ಬಂದಿ ಕೊರತೆ ಇದ್ದರೂ ಲಸಿಕಾ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ. 29 ಸಾವಿರ ಜಾನುವಾರುಗಳಿಗೆ ಲಸಿಕೆ ನೀಡುವ ಗುರಿಯಲ್ಲಿ ಈಗಾಗಲೇ 13 ಸಾವಿರಕ್ಕೂ ಅಧಿಕ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಇದೇ ಮೊದಲ ಬಾರಿಗೆ OTP ಆಧಾರಿತ ಪರಿಶೀಲನೆ ವ್ಯವಸ್ಥೆ ಜಾರಿಯಾಗಿದೆ. ಸಿಬ್ಬಂದಿ ಮನೆಗೆ ಬಂದಾಗ ರೈತರು ತಮ್ಮ ಮೊಬೈಲ್ಗೆ ಬಂದಿರುವ OTP ನೀಡಿ ಸಹಕರಿಸಬೇಕು.”
— ಡಾ. ಪ್ರಕಾಶ ಚೂರಿ, ಸಹಾಯಕ ನಿರ್ದೇಶಕರು, ಪಶುಪಾಲನಾ ಇಲಾಖೆ
“ಪ್ರತಿ ಆರು ತಿಂಗಳಿಗೊಮ್ಮೆ ನಡೆಯುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ರೈತರು ತಪ್ಪದೇ ಭಾಗವಹಿಸಬೇಕು. ಭಾರತ್ ಪಶುಧನ್ ತಂತ್ರಾಂಶದಲ್ಲಿ ನೋಂದಾಯಿತ ಜಾನುವಾರುಗಳಿಗೆ ಲಸಿಕೆ ಹಾಕುವ ಕಾರ್ಯ ಅಂತಿಮ ಹಂತ ತಲುಪಿದೆ. ಬಿಸಿಲಿನ ಹೆಚ್ಚಿರುವುದರಿಂದ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಲಸಿಕೆ ಕಾರ್ಯ ನಡೆಸಲಾಗುತ್ತಿದ್ದು, ರೈತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.”
— ಸಿದ್ದನಗೌಡ ಪಾಟೀಲ, ಕಿರಿಯ ಪಶುವೈದ್ಯಕೀಯ ಪರೀಕ್ಷಕಿ, ಚಿಕಿತ್ಸಾಲಯ.
